ಬೆಳ್ತಂಗಡಿ:ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬೆಳ್ತಂಗಡಿಯ ಟಿವಿಎಸ್ ಲೋಬೋ ಮೋಟಾರ್ಸ್ ವತಿಯಿಂದ ದೇಶಭಕ್ತಿ ಸಾರುವ ಬೈಕ್ ರ್ಯಾಲಿ ಹಾಗೂ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವು ಜು 26ರಂದು ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೇಜರ್ ಜನರಲ್ ಎಂ.ವಿ. ಭಟ್ ಮಾತನಾಡಿ, ದೇಶಭಕ್ತಿಯನ್ನು ಜನಮನಗಳಲ್ಲಿ ಜಾಗೃತಿಗೊಳಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಶ್ಲಾಘನೀಯವಾಗಿವೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ಸುಮಾರು 547 ಯೋಧರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದು, 500ಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ. ಅವರ ತ್ಯಾಗ, ಬಲಿದಾನ ಮತ್ತು ದೇಶಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಹೇಳಿದರು.

ಟಿವಿಎಸ್ ಲೋಬೋ ಮೋಟಾರ್ಸ್ನ ಮಾಲಕರಾದ ರೊನಾಲ್ಡೊ ಲೋಬೋ ಮಾತನಾಡಿ, ನಮ್ಮ ಸುರಕ್ಷಿತ ಬದುಕಿಗಾಗಿ ಗಡಿಯಲ್ಲಿ ಹಗಲಿರುಳು ಕಾವಲು ಕಾಯುತ್ತಿರುವ ಯೋಧರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಕಾರ್ಗಿಲ್ ವಿಜಯೋತ್ಸವ ಆಚರಿಸುವ ಮೂಲಕ ಯೋಧರ ತ್ಯಾಗ ಹಾಗೂ ಬಲಿದಾನವನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶ ದೊರೆತಿರುವುದು ಸಂತಸದ ಸಂಗತಿ ಎಂದು ತಿಳಿಸಿ ಎಲ್ಲರನ್ನು ಸ್ವಾಗತಿಸಿದರು.

ಬಳಿಕ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಒಂದೇ ಮಾದರಿಯ ರೈನ್ಕೋಟ್ ಧರಿಸಿ ದೇಶಭಕ್ತಿ ಘೋಷಣೆಗಳೊಂದಿಗೆ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದರು. ರ್ಯಾಲಿಗೆ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಚಾಲನೆ ನೀಡಿದರು.ಬೆಳ್ತಂಗಡಿಯಿಂದ ಆರಂಭವಾದ ರ್ಯಾಲಿಯು ಉಜಿರೆ, ಗುರುವಾಯನಕೆರೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಪುನಃ ಬೆಳ್ತಂಗಡಿಯಲ್ಲಿ ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ಗಣ್ಯರು, ಸಂಸ್ಥೆಯ ಸಿಬ್ಬಂದಿ, ಸಾರ್ವಜನಿಕರು ಹಾಗೂ ದೇಶಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಗಿಲ್ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.

















