ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಗ್ರಾಮದ ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿಗಳನ್ನು ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗಳು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಸೋಮವಾರ ಸಲ್ಲಿಸಿದೆ.

ಲಾಯಿಲ ಗ್ರಾಮದ ಬರಮೇಲು ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರುಗಳಾದ ಹಿರಿಯ ಸಿವಿಲ್ ನ್ಯಾಯಧೀಶ , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ ಹಾಗೂ ಪ್ರಧಾನ ಸಿವಿಲ್ ನ್ಯಾಯಧೀಶ , ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪರವರು ಅದಿತ್ಯವಾರ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿದ್ದರು.
ನ್ಯಾಯಧೀಶರ ಆದೇಶದಂತೆ ಇಂದು ಲಾಯಿಲ ಗ್ರಾಮ ಪಂಚಾಯತ್ ಬರೆಮೇಲು ನಡುಗಡ್ಡೆ ಪ್ರದೇಶದ ವಿಸ್ತೃತ ವರದಿಯನ್ನು , ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸವಣಾಲು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಮಲೆಕುಡಿಯ ಪ್ರದೇಶದ ಸೇತುವೆ ನಿರ್ಮಾಣದ ಬಗ್ಗೆ ವಿಸ್ತೃತ ವರದಿಯನ್ನು ತಾಲೂಕು ಕಾನೂನು ಸೇವೆಗಳ ಸಮಿತಿಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
















