ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ 32ನೇ ವರ್ಷದ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ 23ನೇ ವರ್ಷದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ಪ್ರದಾನ ಸಮಾರಂಭ ಆ 1ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು.
ಶಾಂತಿವನ ಟ್ರಸ್ಟ್ ಟ್ರಸ್ಟಿಗಳಾದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ‘ಜ್ಞಾನ ಚಂದನ’ ಮತ್ತು ‘ಜ್ಞಾನ ನಂದನ’ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಸಾಹಿತಿ, ಅಂಕಣಕಾರ್ತಿ ಹಾಗೂ ಉಪನ್ಯಾಸಕಿ ದೀಪಾ ಹಿರೇಗುತ್ತಿ ಲೋಕಾರ್ಪಣೆಗೊಳಿಸಿದರು. ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಚಲನಚಿತ್ರ ನಟ ಹಾಗೂ ನಿರ್ದೇಶಕ ಅಭಿಜಿತ್ ಪ್ರಶಸ್ತಿ ಪ್ರದಾನ ಮಾಡಿದರು.
1993ರಿಂದ 2025ರವರೆಗೆ ಈ ಯೋಜನೆಯಡಿ 24 ಲಕ್ಷ 23 ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ರಾಜ್ಯದ ವಿವಿಧ ಶಾಲೆಗಳಿಗೆ ವಿತರಿಸಲಾಗಿದೆ ಎಂದು ತಿಳಿಸಲಾಯಿತು.
ವೇದಿಕೆಯಲ್ಲಿ ಕ್ಷೇಮವನದ ಸಿಇಓ ಶ್ರದ್ದಾ ಅಮಿತ್, ಶ್ರೀ ಕ್ಷೇತ್ರ ಧರ್ಮಸ್ಥಳ ಸುಪ್ರಿಯಾ ಹರ್ಷೆಂದ್ರ ಕುಮಾರ್,ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ,ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಯು. ಜಗನ್ನಾಥ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಪರ್ಧಾ ವಿಜೇತರ ಪಟ್ಟಿಯನ್ನು ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ.ಆರ್. ವಾಚಿಸಿದರು. ನಿಶಾಂತ್ ಕಾರ್ಯಕ್ರಮ ನಿರೂಪಿಸಿದರೆ, ಶೇಖರ್ ಕಡ್ತಲ ವಂದಿಸಿದರು.













