ಮುಂಡಾಜೆ: ಮುಂಡಾಜೆ ಗ್ರಾಮ ವ್ಯಾಪ್ತಿಯ ಸೋಮಂತ್ತಡ್ಕ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಯ ಮೊಬೈಲ್ ಟವರ್ ಕುಸಿಯುವ ಹಂತದಲ್ಲಿದ್ದು ಗ್ರಾಮದ ಜನರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ.

ಕೆಲ ವರ್ಷಗಳ ಹಿಂದೆ ಪ್ರಾರಂಭಗೊಂಡ ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸೋಮಂತ್ತಡ್ಕ ಪ್ರದೇಶದಲ್ಲಿ ರಸ್ತೆಗಳ ತಿರುವುಗಳನ್ನು ತಪ್ಪಿಸುವ ದೃಷ್ಟಿಯಿಂದ ಎತ್ತರ ಪ್ರದೇಶದ ಮಣ್ಣುಗಳನ್ನು ತೆಗೆದು ರಸ್ತೆ ನಿರ್ಮಾಣ ಮಾಡಿ ತಡೆಗೋಡೆ ನಿರ್ಮಿಸಿದ್ದರು ಸಹ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಡೆಗೋಡೆಯ ಮೇಲ್ಬಾಗದಲ್ಲಿರುವ ಮಣ್ಣು ಸಂಪೂರ್ಣವಾಗಿ ಸಡಿಲಗೊಂಡಿದ್ದು ಮೊಬೈಲ್ ಟವರ್ ಸದ್ಯ ಕುಸಿಯುವ ಹಂತದಲ್ಲಿದೆ. ಜೊತೆಗೆ ವಿದ್ಯುತ್ ತಂತಿಗಳು, ರಸ್ತೆಯಲ್ಲಿ ಸಂಚಾರಿಸುವ ವಾಹನ ಸವಾರರಿಗೆ ಹಾನಿಯಾಗುವ ಸಾಧ್ಯತೆಯೂ ಇದೆ. ಕೂಡಲೇ ಅಧಿಕಾರಿಗಳು ಬಂದು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಗುಡ್ಡ ಕುಸಿತ ಘಟನೆಗಳು ನಡೆದಿವೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಹವಾಮಾನ ಇಲಾಖೆ ಮುಂದಿನ ಕೆಲ ದಿನಗಳವರೆಗೆ ಸಾಧಾರಣ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನದಿ ತೀರ ಹಾಗೂ ಗುಡ್ಡಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ತಾಲೂಕು ಆಡಳಿತ ಮನವಿ ಮಾಡಿದೆ. ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದ್ದರೂ ಮುನ್ನೆಚ್ಚರಿಕೆ ಕ್ರಮ ಮುಂದುವರಿಸಲಾಗಿದೆ.













