ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ನೇಮಕಾತಿ ಘಟಕದ ವತಿಯಿಂದ ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಉದ್ಯೋಗ ನೇಮಕಾತಿ ಸಿದ್ಧತೆ ತರಬೇತಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೆಂಗಳೂರಿನ DXC Technologies ಸಂಸ್ಥೆಯ ಅಸೋಸಿಯೇಟ್ ಮ್ಯಾನೇಜರ್ ಜಿನಾ ಪ್ರಸಾದ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿ, ವಿಶೇಷವಾಗಿ ಅಪ್ಟಿಟ್ಯೂಡ್ ಮತ್ತು ತಾಂತ್ರಿಕ ಕೌಶಲ್ಯಗಳ ಅಭಿವೃದ್ಧಿ, ರೆಸ್ಯೂಮ್ ತಯಾರಿಕೆ, ಸಂದರ್ಶನ ಎದುರಿಸುವ ತಂತ್ರಗಳು, ಸಂವಹನ ಕೌಶಲ್ಯಗಳು ಹಾಗೂ ಉದ್ಯಮ ಕ್ಷೇತ್ರದ ನಿರೀಕ್ಷೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳಿಗೆ ಪರಿಣಾಮಕಾರಿಯಾಗಿ ಸಿದ್ಧತೆ ನಡೆಸುವ ಆಯಾಮಗಳನ್ನು ಪರಿಚಯಿಸಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಸಲಹೆಗಳನ್ನು ನೀಡಿದರು. ವಿದ್ಯಾರ್ಥಿಗಳು ನಿರಂತರ ಕಲಿಕೆ ಹಾಗೂ ವೃತ್ತಿಪರ ಕೌಶಲ್ಯಗಳ ಮೈಗೂಡಿಸಿಕೊಂಡು ಉದ್ಯೋಗ ಕ್ಷೇತ್ರಕ್ಕೆ ಸನ್ನದ್ಧರಾಗಬೇಕು ಎಂದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸುಮಾರು 430 ವಿದ್ಯಾರ್ಥಿಗಳು ಭಾಗವಹಿಸಿ ಉದ್ಯಮ ತಜ್ಞರ ಮಾರ್ಗದರ್ಶನದ ಪ್ರಯೋಜನ ಪಡೆದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಉಪನ್ಯಾಸಕರು, ಮುಖ್ಯಸ್ಥರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ತರಬೇತಿ ಮತ್ತು ಉದ್ಯೋಗ ನೇಮಕಾತಿ ಸಂಯೋಜಕರಾದ ಡಾ. ಸುಬ್ರಹ್ಮಣ್ಯ ಎಸ್. ಬಿ. ಹಾಗೂ ತಂಡದ ಸದಸ್ಯರು ಸಂಯೋಜಿಸಿದರು.













