ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆನೆ ಹಾವಳಿ ಮಿತಿ ಮೀರುತ್ತಿದ್ದು, ಕೃಷಿ ಬೆಳೆಗಳಿಗೆ ವ್ಯಾಪಕ ಹಾನಿಯಾಗುವುದರ ಜೊತೆಗೆ ಗ್ರಾಮೀಣ ಪ್ರದೇಶದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಪರಿಸರ ಕಾರ್ಯಕರ್ತ ಬಿ. ಜಯರಾಮ ನೆಲ್ಲಿತ್ತಾಯ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಆನೆಗಳ ಸಂಚಾರದಿಂದ ರಾತ್ರಿ ವೇಳೆ ವಾಹನಗಳ ಓಡಾಟಕ್ಕೂ ತೊಂದರೆಯಾಗುತ್ತಿದ್ದು, ಪ್ರಯಾಣಿಕರು ಆತಂಕದಿಂದ ಸಂಚರಿಸುವಂತಾಗಿದೆ. ಹಲವೆಡೆ ಕಾಡಂಚಿನ ಗ್ರಾಮಗಳಲ್ಲಿ ಜನಸಾಮಾನ್ಯರು ರಾತ್ರಿ ಹಾಗೂ ಮುಂಜಾನೆ ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕಾಡಿನಂಚಿನಲ್ಲಿ ವಾಸಿಸುವ ಕುಟುಂಬಗಳು ವಿದ್ಯುತ್ ಬೆಳಕಿನ ವ್ಯವಸ್ಥೆಯ ಕೊರತೆಯಿಂದಾಗಿ ರಾತ್ರಿ ಸಮಯದಲ್ಲಿ ಭಯದಲ್ಲೇ ದಿನ ಕಳೆಯುವಂತಾಗಿದೆ. ವಿದ್ಯಾರ್ಥಿಗಳು ಕೂಡ ಆನೆಗಳ ಭೀತಿಯಿಂದ ಪ್ರತಿನಿತ್ಯ ಶಾಲೆಗೆ ತೆರಳಲು ಆತಂಕಪಡುವ ಪರಿಸ್ಥಿತಿ ಎದುರಾಗಿದೆ. ಆನೆಗಳ ಹಾವಳಿಯಿಂದ ಕೃಷಿ ಬೆಳೆಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಆನೆ ಹಾವಳಿಯ ತೀವ್ರತೆ ಹೆಚ್ಚಾಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು, ಆನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಹಾಗೂ ಪರಿಣಾಮಕಾರಿ ಪರಿಹಾರ ರೂಪಿಸಬೇಕು ಎಂದು ಬಿ. ಜಯರಾಮ ನೆಲ್ಲಿತ್ತಾಯ ಆಗ್ರಹಿಸಿದ್ದಾರೆ.













