ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 18ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಭಾರತೀಯ ಮಜ್ದೂರ್ ಸಂಘದ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಉದಯ ಬಿ.ಕೆ. ತಿಳಿಸಿದ್ದಾರೆ.
ತಾಲೂಕಿನ ಕಟ್ಟಡ ಕಾರ್ಮಿಕರು, ರಬ್ಬರ್ ಹಾಗೂ ಕೃಷಿ ಕಾರ್ಮಿಕರು, ಆಟೋ–ಟ್ಯಾಕ್ಸಿ ಚಾಲಕರು, ಕೈಗಾರಿಕಾ ಕಾರ್ಮಿಕರು, ಹೋಟೆಲ್ ಕಾರ್ಮಿಕರು, ಗುತ್ತಿಗೆ ಹಾಗೂ ಅಸಂಘಟಿತ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟದಲ್ಲಿ ಭಾಗವಹಿಸುವ ಅಗತ್ಯವಿದೆ.
ನ್ಯಾಯಯುತ ವೇತನ, ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತೆ, ಪಿಂಚಣಿ, ಆರೋಗ್ಯ ರಕ್ಷಣೆ ಹಾಗೂ ಸುರಕ್ಷಿತ ಕೆಲಸದ ವಾತಾವರಣ ಸೇರಿದಂತೆ ಕಾರ್ಮಿಕರ ಬದುಕಿಗೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಕಾರ್ಮಿಕರು ಪಕ್ಷ–ಪಂಥದ ಭೇದವಿಲ್ಲದೆ ಒಗ್ಗಟ್ಟಿನಿಂದ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಆಗಸ್ಟ್ 18ರಂದು ನಡೆಯುವ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನ ಪ್ರತಿಯೊಂದು ಕಾರ್ಮಿಕ ವಲಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಬಂಧುಗಳು ಭಾಗವಹಿಸಿ, ನಮ್ಮ ತಾಲೂಕಿನ ಕಾರ್ಮಿಕ ಶಕ್ತಿಯನ್ನು ಪ್ರದರ್ಶಿಸುವ ಮೂಲಕ ಹೋರಾಟಕ್ಕೆ ಬಲ ತುಂಬಬೇಕು ಎಂದು ಉದಯ ಬಿ.ಕೆ. ಕರೆ ನೀಡಿದ್ದಾರೆ.
ಕಾರ್ಮಿಕರ ಸಮಸ್ಯೆ ನಮ್ಮೆಲ್ಲರ ಸಮಸ್ಯೆ. ಕಾರ್ಮಿಕರ ಹಕ್ಕುಗಳಿಗಾಗಿ ನಡೆಯುವ ಈ ಹೋರಾಟದಲ್ಲಿ ಪ್ರತಿಯೊಬ್ಬ ಕಾರ್ಮಿಕನ ಧ್ವನಿಯೂ ಸೇರಬೇಕು. ಬೆಳ್ತಂಗಡಿ ತಾಲೂಕಿನಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸೋಣ ಎಂದು ಉದಯ ಬಿಕೆ ತಿಳಿಸಿದ್ದಾರೆ.













