ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ‘ರಕ್ಷಕ ನಮನ–2026’ ಕಾರ್ಯಕ್ರಮವನ್ನು ಆ.15 ಮತ್ತು 16ರಂದು ಅರಮಲೆಬೆಟ್ಟು ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.

ಭಾರತೀಯ ಸೇನೆ ಹಾಗೂ ಆರಕ್ಷಕ ವಿಭಾಗಗಳಲ್ಲಿ ರಾಷ್ಟ್ರಸೇವೆಯಲ್ಲಿರುವ ಎಕ್ಸೆಲ್ನ ವಿದ್ಯಾರ್ಥಿಗಳ ಪಾಲಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ರಾಷ್ಟ್ರದ ಭದ್ರತೆ ಹಾಗೂ ಸೇವೆಯಲ್ಲಿ ತೊಡಗಿರುವ ವೀರ ಯೋಧರು ಮತ್ತು ಪೊಲೀಸ್ ಸಿಬ್ಬಂದಿಯ ಕುಟುಂಬಗಳನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರಸೇವೆಯ ಗೌರವವನ್ನು ಬೆಳೆಸುವ ಆಶಯವನ್ನು ಸಂಸ್ಥೆ ಹೊಂದಿದೆ ಎಂದರು.
ಆ.15ರಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮೇಜರ್ ಡಾ. ಕುಶಾಲ್ ಕೆ.ಎನ್, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠಲ ಎ ಅವರು ಭಾಗವಹಿಸಲಿದ್ದಾರೆ. ಬಳಿಕ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಆ.15 ಮತ್ತು 16ರಂದು ನಡೆಯಲಿರುವ ‘ರಕ್ಷಕ ನಮನ–2026’ರಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಮೂಲಕ ರಾಷ್ಟ್ರದ ಗಡಿಗಳನ್ನು ಕಾಯುವ ಸೈನಿಕರು ಹಾಗೂ ಸಮಾಜದ ರಕ್ಷಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಗೌರವ ಹಾಗೂ ಕೃತಜ್ಞತೆ ಸಲ್ಲಿಸಲಾಗುವುದು.
ಆ.16ರಂದು ವಿವಿಧ ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಲಿದ್ದು, ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಲಿದೆ.
ದೇಶದ ಸುರಕ್ಷತೆಗಾಗಿ ಸೇವೆ ಸಲ್ಲಿಸುತ್ತಿರುವ ಯೋಧರು ಹಾಗೂ ಆರಕ್ಷಕ ಸಿಬ್ಬಂದಿಯ ತ್ಯಾಗ ಮತ್ತು ಸೇವೆಯನ್ನು ಸ್ಮರಿಸುವ ಈ ಕಾರ್ಯಕ್ರಮಕ್ಕೆ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ವಿಶೇಷ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪೋಲೀಸ್ ಅಧಿಕ್ಷಕ ಕುಮಾರ್ ಚಂದ್ರ,ಬೆಳ್ತಂಗಡಿ ಉಪ ಠಾಣಾಧಿಕಾರಿ ಸಿಕಂದರ ಪಾಷ ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.













