ಬೆಳ್ತಂಗಡಿ: ತುಳುನಾಡಿನ ಆಟಿ ತಿಂಗಳ ವಿಶೇಷತೆ, ಸಾಂಪ್ರದಾಯಿಕ ಆಹಾರ ಪದ್ಧತಿ, ಆಚರಣೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆಯಲ್ಲಿ ಆಯೋಜಿಸಿದ್ದ ‘ಆಟಿದ ಕಲ’ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.
ಬೆಳಗ್ಗೆ ನಡೆದ ಸಾಂಪ್ರದಾಯಿಕ ಆಟಿ ತಿಂಗಳ ತಿಂಡಿ-ತಿನಿಸುಗಳ ಸ್ಪರ್ಧೆಗಳ ಉದ್ಘಾಟನೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನೆರವೇರಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಸುಮಾರು 30 ತಂಡಗಳಲ್ಲಿ ಪಾಲ್ಗೊಂಡು ವಿವಿಧ ಬಗೆಯ ಸಾಂಪ್ರದಾಯಿಕ ಆಟಿ ತಿಂಡಿಗಳನ್ನು ತಯಾರಿಸಿ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದ ತಯಾರಿಸಲಾದ ವೈವಿಧ್ಯಮಯ ಸಾಂಪ್ರದಾಯಿಕ ತಿಂಡಿಗಳು ಗಮನ ಸೆಳೆದವು.
ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ರವೀಂದ್ರ ಶೆಟ್ಟಿ ಬಳಂಜ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಆಟಿ ತಿಂಗಳ ವಿಶೇಷತೆ, ತುಳುನಾಡಿನಲ್ಲಿ ಆಟಿ ಸಂದರ್ಭದಲ್ಲಿ ಆಚರಿಸಲಾಗುವ ವಿವಿಧ ಆಚರಣೆಗಳು ಹಾಗೂ ಅವುಗಳ ಸಾಂಸ್ಕೃತಿಕ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿಯ ನಿರ್ದೇಶಕಿ ಉಷಾ ದೇವಿ ಕಿನ್ಯಾಜೆ, ನಿವೃತ್ತ ಶಿಕ್ಷಕಿ ಶ್ರೀಮತಿ ಉಮಾ ರಾವ್ ಹಾಗೂ ಗುರುವಾಯನಕೆರೆಯ ಉದ್ಯಮಿಯಾದ ಶ್ರೀಮತಿ ದೀಪ ಶೆಣೈ ಉಪಸ್ಥಿತರಿದ್ದರು.
ಉಪಸ್ಥಿತಿಯಲ್ಲಿ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಹಾಗೂ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ. ನೆರವೇರಿಸಿದರು. ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಸಾಂಪ್ರದಾಯಿಕ ಹಾಗೂ ಮನರಂಜನಾ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಎಲ್ಲಾ ಸ್ಪರ್ಧಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿ, ಆಟಿ ತಿಂಗಳ ವಿಶೇಷ ತಿಂಡಿಗಳು ಹಾಗೂ ವಿವಿಧ ಗ್ರಾಮೀಣ ಕ್ರೀಡೆಗಳ ಮೂಲಕ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಅನಾವರಣಗೊಳಿಸಿದರು.
‘ಸವಿ ತೆನಸ್ದ ಕಮ್ಮನೋ, ಗೊಬ್ಬುದ ಗಮ್ಮತ್!’ ಎಂಬ ಆಶಯದೊಂದಿಗೆ ನಡೆದ ‘ಆಟಿದ ಕಲ’ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಜನಪದ ಕ್ರೀಡೆಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ, ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿ ಮೂಡಿಬಂದಿತು.













