ಉಜಿರೆ : ದೇಶದ ಸ್ವಾತಂತ್ರ್ಯದ ಜೊತೆಗೆ ಯುವಜನರು ಆರ್ಥಿಕ ಸ್ವಾತಂತ್ರ್ಯವನ್ನೂ ಸಾಧಿಸಿ ಸ್ವಾವಲಂಬಿಗಳಾಗಿ ಮುನ್ನಡೆಯಬೇಕು ಎಂದು ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ ಕುಮಾರ್ ಹೇಳಿದರು.
ಅವರು ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಣ, ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಬೆಳೆಸಿಕೊಂಡು ಸ್ವಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.

ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯ್ಕೆ ಅತಿಥಿಗಳು ಹಾಗೂ ಶಿಬಿರಾರ್ಥಿಗಳನ್ನು ಸ್ವಾಗತಿಸಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು.
ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ನಿರೂಪಿಸಿದರು. ಕೆ. ಕರುಣಾಕರ ಜೈನ್ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಅನಸೂಯಾ, ಪ್ರಸಾದ್, ಪ್ರವೀಣ್, ಕಾಶ್ಮೀರ ಡಿ. ಸೋಜಾ ಹಾಗೂ ಸುರೇಶ್ ಗೌಡ ಉಪಸ್ಥಿತರಿದ್ದರು.

ರುಡ್ಸೆಟ್ ಸಂಸ್ಥೆಯಲ್ಲಿ ನಡೆಯುತ್ತಿದ್ದ ಕಂಪ್ಯೂಟರ್ ಟ್ಯಾಲಿ, ಮಹಿಳೆಯರ ವಸ್ತ್ರ ಚಿತ್ರಕಲೆ, ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಹಾಗೂ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮಗಳ ಅತಿಥಿ ಉಪನ್ಯಾಸಕರಾದ ಸಚಿನ್, ರಶ್ಮಿ ಹಾಗೂ ಸೂರ್ಯಪ್ರಕಾಶ್ ಉಪಸ್ಥಿತರಿದ್ದರು.
ವಿವಿಧ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಎಲ್ಲಾ ಶಿಬಿರಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಉತ್ಸಾಹದಿಂದ ಭಾಗವಹಿಸಿದರು.
“ದೇಶದ ಸ್ವಾತಂತ್ರ್ಯ ನಮ್ಮ ಹೆಮ್ಮೆ; ಆರ್ಥಿಕ ಸ್ವಾವಲಂಬನೆ ನಮ್ಮ ಗುರಿ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.












