ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಅಳದಂಗಡಿ ಅಜಿಲ ಅರಸು ಮನೆತನದ ಶ್ರೀ ಶಿವಪ್ರಸಾದ್ ಅಜಿಲ ಅವರನ್ನು ಅಧ್ಯಕ್ಷರಾಗಿ ಹಾಗೂ ಉಪ್ಪಿನಂಗಡಿಯ ಡಾ. ನಿರಂಜನ್ ರೈ ಅವರನ್ನು ಪ್ರಧಾನ ಸಂಚಾಲಕರಾಗಿ ನೇಮಕ ಮಾಡಲಾಗಿದೆ.
ಅಳದಂಗಡಿ ಅರಸು ಮನೆತನದ ಶ್ರೀ ಕೃಷ್ಣರಾಜ ಅಜಿಲ ಮತ್ತು ಶ್ರೀಮತಿ ಸರಸ್ವತಿಯಮ್ಮ ಅವರ ಪುತ್ರರಾದ ಶ್ರೀ ಶಿವಪ್ರಸಾದ್ ಅಜಿಲ ಅವರು ಅಳದಂಗಡಿ ಅರಮನೆಯ ಐತಿಹಾಸಿಕ ಪರಂಪರೆಯ ಕುಟುಂಬದಿಂದ ಬಂದವರು. ಇಂಜಿನಿಯರಿಂಗ್ ಶಿಕ್ಷಣ ಪಡೆದ ಅವರು 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಇಂಜಿನಿಯರಿಂಗ್ ವಿಭಾಗದಲ್ಲಿ ಸೇವೆಗೆ ಸೇರ್ಪಡೆಗೊಂಡರು. ಸಾರ್ವಜನಿಕ ಕಾಮಗಾರಿಗಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಬಳಿಕ 1997ರಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದಲ್ಲಿ ಸೇವೆ ಆರಂಭಿಸಿ, ಸಾರ್ವಜನಿಕ ಕಾಮಗಾರಿಗಳ ಇಲಾಖೆಯ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಅವರು ಸಲ್ಲಿಸಿರುವ ಸೇವೆ ಗಮನಾರ್ಹವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ಪ್ರಮುಖ ಜಿಲ್ಲೆಗಳ ರಸ್ತೆ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾಮಗಾರಿಗಳಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಾರೆ.
ವೃತ್ತಿಜೀವನದ ಜೊತೆಗೆ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶಿವಪ್ರಸಾದ್ ಅಜಿಲ ಅವರು ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಸಂಘಟನೆ ಮತ್ತು ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಜಿಲ್ಲಾ ಪ್ರಧಾನ ಸಂಚಾಲಕರಾಗಿ ನೇಮಕಗೊಂಡಿರುವ ಉಪ್ಪಿನಂಗಡಿಯ ಡಾ. ನಿರಂಜನ್ ರೈ ಅವರು ಆಯುರ್ವೇದ ವೈದ್ಯರಾಗಿ ವೈದ್ಯಕೀಯ ಸೇವೆ ಸಲ್ಲಿಸುವುದರ ಜೊತೆಗೆ ಪ್ರಮುಖ ಪರಿಸರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಹಾಗೂ ಪುತ್ತೂರು ಭಾಗದಲ್ಲಿ ವೈದ್ಯಕೀಯ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು, ತುಳು ಭಾಷೆಯ ಉಳಿವು, ಬೆಳವಣಿಗೆ ಹಾಗೂ ತುಳುವರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದಾರೆ.ನೇತ್ರಾವತಿ ನದಿ ತಿರುವು ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಹಾಗೂ ಪ್ರಮುಖ ಹೋರಾಟಗಾರರಾಗಿ ಕಾರ್ಯನಿರ್ವಹಿಸಿರುವ ಡಾ. ನಿರಂಜನ್ ರೈ ಅವರು, ನೇತ್ರಾವತಿ ನದಿ ತಿರುವು ಹಾಗೂ ಎತ್ತಿನಹೊಳೆ ಯೋಜನೆಯಿಂದ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಹಾಗೂ ಕರಾವಳಿ ಕರ್ನಾಟಕದ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಯ ವಿಚಾರದಲ್ಲಿ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಪ್ರತಿಭಟನೆಗಳನ್ನು ಸಂಘಟಿಸಿ ಮುನ್ನಡೆಸಿರುವ ಅವರು ಸಾಮಾಜಿಕ ಹಾಗೂ ಪರಿಸರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ಅದೇ ರೀತಿ ತುಳು ಭಾಷೆಗೆ ಸೂಕ್ತ ಸ್ಥಾನಮಾನ ದೊರಕಿಸುವುದು, ತುಳುವರ ಭಾಷಾ ಮತ್ತು ಸಾಂಸ್ಕೃತಿಕ ಹಕ್ಕುಗಳ ರಕ್ಷಣೆ ಹಾಗೂ ತುಳು ಭಾಷೆಯ ಅಭಿವೃದ್ಧಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿರುವ ಡಾ. ನಿರಂಜನ್ ರೈ ಅವರು, ತುಳುಪರ ಹೋರಾಟಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಶಿವಪ್ರಸಾದ್ ಅಜಿಲ ಅವರ ಸಾರ್ವಜನಿಕ ಸೇವೆ, ಆಡಳಿತಾತ್ಮಕ ಹಾಗೂ ಇಂಜಿನಿಯರಿಂಗ್ ಕ್ಷೇತ್ರದ ಅನುಭವ ಮತ್ತು ಡಾ. ನಿರಂಜನ್ ರೈ ಅವರ ವೈದ್ಯಕೀಯ, ಸಾಮಾಜಿಕ, ಪರಿಸರ ಹಾಗೂ ತುಳುಪರ ಹೋರಾಟದ ಅನುಭವವನ್ನು ಬಳಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ. 2028ರ ಶತಮಾನೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ವಲಯಗಳಲ್ಲಿ ತುಳುವರನ್ನು ಸಂಘಟಿಸಿ, ಜಾತಿ, ಧರ್ಮ ಹಾಗೂ ಪಕ್ಷಭೇದಗಳನ್ನು ಬದಿಗಿಟ್ಟು ತುಳುವರ ಏಕತೆಯನ್ನು ಬಲಪಡಿಸುವುದರೊಂದಿಗೆ, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು. ನೂತನ ಅಧ್ಯಕ್ಷ ಶಿವಪ್ರಸಾದ್ ಅಜಿಲ ಹಾಗೂ ಜಿಲ್ಲಾ ಪ್ರಧಾನ ಸಂಚಾಲಕ ಡಾ. ನಿರಂಜನ್ ರೈ, ಉಪ್ಪಿನಂಗಡಿ ಅವರ ನೇಮಕವನ್ನು ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಪದಾಧಿಕಾರಿಗಳು ಹಾಗೂ ಪ್ರಮುಖರು ಹರ್ಷದಿಂದ ಸ್ವಾಗತಿಸಿ, ಇಬ್ಬರಿಗೂ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಹಾರೈಕೆಗಳನ್ನು ಸಲ್ಲಿಸಿದ್ದಾರೆ.












