ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಆ.15 ರಂದು ಅರಮಲೆಬೆಟ್ಟು ಕ್ಯಾಂಪಸ್ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಭಾರತದ ಭವಿಷ್ಯ ರೂಪಿಸುವಲ್ಲಿ ಇಂದಿನ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಹೆತ್ತವರಿಗೆ ದೊಡ್ಡ ಆಸ್ತಿಯಾಗಿ, ದೇಶಕ್ಕೆ ಹೆಮ್ಮೆಯಾಗುವ ರೀತಿಯಲ್ಲಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಜೀವನದ ಸಾಧನೆಗೆ ಎಕ್ಸೆಲ್ ಸದಾ ದಾರಿದೀಪವಾಗಿ ನಿಂತಿರುತ್ತದೆ ಎಂದು ಹೇಳಿದರು.

ಭಾರತೀಯ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿರುವ ಮೇ. ಡಾ. ಕುಶ್ವಂತ್ ಕೆ.ಎನ್. ಧ್ವಜಾರೋಹಣ ನೆರವೇರಿಸಿ, ಬಳಿಕ ನೀಟ್ ಸಾಧಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠಲ ಎ., ಅರಮಲೆಬೆಟ್ಟು ಕ್ಯಾಂಪಸ್ ಪ್ರಾಂಶುಪಾಲ ಡಾ. ಪ್ರಜ್ವಲ್ ಕಜೆ, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾಂಶುಪಾಲ ಸುಮಿತ್ರಾ ಗೌಡ ಹಾಗೂ ವೇಣೂರು ಟೆಕ್ನೋ ಸ್ಕೂಲ್ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ‘ಗೆಜ್ಜೆ ಹೆಜ್ಜೆ–ನೃತ್ಯ ವೈಭವ’ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾಂಶುಪಾಲ ಸುಮಿತ್ರಾ ಗೌಡ ವಂದಿಸಿದರು.












