ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬಳಂಜ ಇಲ್ಲಿನ ಶಾಲಾ ಮಕ್ಕಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ.), ಬಳಂಜ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಿಸುವ ಕಾರ್ಯಕ್ರಮ ನಡೆಯಿತು.
ಶಾಲಾ ಮಕ್ಕಳಲ್ಲಿ ಶಿಸ್ತು, ಏಕತೆ, ಜವಾಬ್ದಾರಿ ಹಾಗೂ ಶಾಲೆಯ ಮೇಲಿನ ಗೌರವದ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರತಿವರ್ಷ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ಗಳನ್ನು ವಿತರಿಸಲಾಗುತ್ತಿದೆ.
ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಶಿವಾಜಿ ಫ್ರೆಂಡ್ಸ್ ಕ್ಲಬ್ ಕಳೆದ ಹಲವು ವರ್ಷಗಳಿಂದ ವಿವಿಧ ಸಮಾಜಮುಖಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿರುವ ಕ್ಲಬ್, ಬಳಂಜ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೂ ತನ್ನದೇ ಆದ ಕೊಡುಗೆ ನೀಡಿದೆ.
ಕಳೆದ ವರ್ಷ ಸುಮಾರು ರೂ.1 ಲಕ್ಷ ವೆಚ್ಚದಲ್ಲಿ ಬಳಂಜ ಶಾಲೆಯ ಎಲ್ಕೆಜಿ ಕಟ್ಟಡದ ನವೀಕರಣ ಹಾಗೂ ಇಂಟರ್ಲಾಕ್ ಅಳವಡಿಕೆ ಕಾರ್ಯವನ್ನು ಕ್ಲಬ್ ವತಿಯಿಂದ ಕೈಗೊಳ್ಳಲಾಗಿತ್ತು. ಇದರೊಂದಿಗೆ ಶಾಲಾ ಮಕ್ಕಳಿಗೆ ಅಗತ್ಯವಿರುವ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯದಲ್ಲಿಯೂ ಕ್ಲಬ್ ನಿರಂತರವಾಗಿ ತೊಡಗಿಸಿಕೊಂಡಿದೆ.
ಈ ರೀತಿಯ ಸಮಾಜಮುಖಿ ಕಾರ್ಯಗಳ ಮೂಲಕ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ, ಅವರಲ್ಲಿ ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಸುವ ನಿಟ್ಟಿನಲ್ಲಿ ಕ್ಲಬ್ ಕಾರ್ಯನಿರ್ವಹಿಸುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶಿವಾಜಿ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ರಾಕೇಶ್ ಹೆಗ್ಡೆ, ಶಿಕ್ಷಣದ ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತಹ ಸಮಾಜಮುಖಿ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲಾಗುವುದು. ಮುಂದಿನ ದಿನಗಳಲ್ಲಿಯೂ ಶಾಲೆ ಹಾಗೂ ವಿದ್ಯಾರ್ಥಿಗಳ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ ಬಳಂಜ, ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಸದಸ್ಯರು, ರೋಟರಿ ಕಂಬೈಕಂಪಾಡಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಸಾಲಿಯನ್, ರತ್ನಾಕರ ಪೂಜಾರಿ, ಧರ್ಣಪ್ಪ ಪೂಜಾರಿ, ಶಾಲಾ ಶಿಕ್ಷಕರು ಹಾಗೂ ಶಿವಾಜಿ ಫ್ರೆಂಡ್ಸ್ ಕ್ಲಬ್ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಶಿವಾಜಿ ಫ್ರೆಂಡ್ಸ್ ಕ್ಲಬ್ನ ಪದಾಧಿಕಾರಿಗಳಾದ ಸತೀಶ್ ಕೆ., ಗಣೇಶ್, ಸಂಭ್ರಮ, ಜಗದೀಶ್ ಶೆಟ್ಟಿ, ಡೀಕಯ್ಯ ಕುಲಾಲ್, ರಾಘವೇಂದ್ರ ಭಟ್, ಯೋಗೇಶ್ ದೇವಾಡಿಗ, ಮಾಧವ ದೇವಾಡಿಗ, ಸಚಿನ್ ಹಾಣಿಂಜ, ಜಗದೀಶ್ ರೈ, ಸಂತೋಷ್ ಕುಮಾರ್ ಕೆ., ಯತೀಶ್ ದೇವಾಡಿಗ ಸೇರಿದಂತೆ ಕ್ಲಬ್ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಿಸಿದರು.
ಕ್ಲಬ್ ವತಿಯಿಂದ ನಡೆಯುತ್ತಿರುವ ಈ ನಿರಂತರ ಸಮಾಜಮುಖಿ ಕಾರ್ಯಕ್ಕೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.












