ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗಳು ಜಂಟಿ ವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಿಂದ ಬಸ್ ನಿಲ್ದಾಣಕ್ಕೆ ಒಳಬರುವ ಕೂಡು ರಸ್ತೆಯ NHAI ವ್ಯಾಪ್ತಿ ಮುಗಿದ ಬಳಿಕ, ಉಳಿದ ಭಾಗದ ಕಾಮಗಾರಿಯನ್ನು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯು ಮುಂದುವರಿಸುವ ಕುರಿತು ಚರ್ಚಿಸಲಾಯಿತು.
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿ ನಿರ್ವಹಿಸುವುದು ಮತ್ತು ಮುಂದಿನ ದಿನಗಳಲ್ಲಿ ರಸ್ತೆಯನ್ನು ಚತುಷ್ಪಥಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆಯೂ ಚರ್ಚೆ ನಡೆಯಿತು.
ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಿರ್ದೇಶನದ ಮೇರೆಗೆ ಸ್ಟ್ರಕ್ಚರಲ್ ಇಂಜಿನಿಯರ್ ಪ್ರಸನ್ನ ದರ್ಬೆ ಅವರು ಎರಡೂ ಇಲಾಖೆಗಳ ಅಧಿಕಾರಿಗಳನ್ನು ಒಟ್ಟುಗೂಡಿಸಿ ಮುಂದಿನ ಯೋಜನೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಶ್ ರೈ, NHAI ಅಧಿಕಾರಿಗಳು, ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ವಿಲ್ಫ್ರೆಡ್, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರಮಜಲ್, ಪುತ್ತೂರು ಗ್ರಾಮಾಂತರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದೇಶ್ ಶೆಟ್ಟಿ, ಮಾಜಿ ಗ್ರಾ.ಪಂ. ಸದಸ್ಯ ಧನಂಜಯ ನೆಟ್ಟಿಬೈಲ್, ಯು.ಟಿ. ತೌಸೀಫ್, ಗ್ರಾಮಸ್ಥರಾದ ರಾಘವೇಂದ್ರ ನೆಟ್ಟಿಬೈಲ್, ಸಿದ್ದಿಕ್ ಮತ್ತಿತರರು ಉಪಸ್ಥಿತರಿದ್ದರು.












