ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಎರಡು ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ, ಅಂದಾಜು 5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅವ್ವಮ್ಮ ಅವರ ಕೈಗೆ ಗಾಯವಾಗಿತ್ತು.ಈ ಕುರಿತು ಅವ್ವಮ್ಮ ಅವರ ಪುತ್ರ ಸಾದಿಕ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 70/2026, ಕಲಂ 309(6) BNS-2023ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆ.16ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತೆಂಕಕಜೇಕಾರು ನಿವಾಸಿ ಹಾಗೂ ಅವ್ವಮ್ಮ ಅವರ ಮೊಮ್ಮಗ ಶಬೀರ್ (33) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣೆ ಪಿಎಸ್ಐ ರಾಜೇಶ್ ಕೆ.ವಿ. ಹಾಗೂ ಎಎಸ್ಐ ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್, ಸತೀಶ್ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ಕಾರ್ಯನಿರ್ವಹಿಸಿದ್ದರು.












