ಉಜಿರೆ: ಎಸ್ಡಿಎಂ ಕಾಲೇಜ್ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸಸ್, ಉಜಿರೆಯ ಯೋಗ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಪ್ರಶಾಂತ್ ಶೆಟ್ಟಿ ಅವರು ಪದೋನ್ನತಿ ಹೊಂದಿ ಎಸ್ಡಿಎಂ ನ್ಯಾಚುರೋಪತಿ & ಯೋಗ ಸಂಸ್ಥೆಗಳ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಸಂಭ್ರಮದಿಂದ ಆಯೋಜಿಸಲಾಯಿತು.

ಎಸ್ಡಿಎಂ ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಪ್ರಶಾಂತ್ ಶೆಟ್ಟಿ ಅವರ ಸಂಸ್ಥೆಯೊಂದಿಗಿನ ಸುದೀರ್ಘ ಸೇವೆಯನ್ನು ಸ್ಮರಿಸಲಾಯಿತು. ಅವರು ವೈದ್ಯಾಧಿಕಾರಿಯಾಗಿ ಸೇವೆ ಆರಂಭಿಸಿ ಹಾಗೂ ಸಹಾಯಕ ಪ್ರಾಧ್ಯಾಪಕರಾಗಿ ನಂತರ ಸುಮಾರು18 ವರ್ಷಗಳ ಕಾಲ ಪ್ರಾಂಶುಪಾಲರಾಗಿ, ಸಂಸ್ಥೆಯ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಸಮರ್ಪಣೆ, ನಾಯಕತ್ವ ಮತ್ತು ಶಿಕ್ಷಣ ಕ್ಷೇತ್ರದ ಸೇವೆಯನ್ನು ಗಣ್ಯರು ಶ್ಲಾಘಿಸಿದರು.
ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಅವರು ಸ್ವಾಗತ ಭಾಷಣ ಮಾಡಿದರು. ಎಸ್ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ದನ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡು, ಡಾ. ಪ್ರಶಾಂತ್ ಶೆಟ್ಟಿ ಅವರ ವೃತ್ತಿಪರ ಬದ್ಧತೆ, ಹಾಗೂ ಸಂಸ್ಥೆಯ ಪ್ರಗತಿಗೆ ನೀಡಿದ ಕೊಡುಗೆಯನ್ನು ಮೆಚ್ಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಡಿ. ಹರ್ಷೇಂದ್ರ ಕುಮಾರ್ ಅವರು ಡಾ. ಪ್ರಶಾಂತ್ ಶೆಟ್ಟಿ ಅವರ ಕಾರ್ಯಕ್ಷಮತೆ ಮತ್ತು ಸೇವಾ ಮನೋಭಾವವನ್ನು ಪ್ರಶಂಸಿಸಿ, ನಿರ್ದೇಶಕರಾಗಿ ಅವರ ಹೊಸ ಜವಾಬ್ದಾರಿಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು. ಡಾ. ಬಾಲಕೃಷ್ಣ ಶೆಟ್ಟಿ ಇವರು ಸನ್ಮಾನ ಪತ್ರವನ್ನು ಓದಿದರು ಮತ್ತು ಡಾ. ಗೀತಾ ಬಿ ಶೆಟ್ಟಿ ಧನ್ಯವಾದವಿತ್ತರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಡಾ. ಪ್ರಶಾಂತ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು.












