ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾವಿರಾರು ಕುಟುಂಬಗಳ ಜೀವನೋಪಾಯವಾಗಿರುವ ಕೋಳಿ ಸಾಕಾಣಿಕೆ ವಲಯವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ, ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ’ದ ಪದಾಧಿಕಾರಿಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಭೇಟಿಯ ಸಂದರ್ಭದಲ್ಲಿ, ಕೋಳಿ ಸಾಕಾಣಿಕೆಯಲ್ಲಿ ಎದುರಾಗುತ್ತಿರುವ ನೊಣಗಳ ಹಾವಳಿ, ಉತ್ಪಾದನಾ ವೆಚ್ಚದ ಏರಿಕೆ, ಕಳಪೆ ಫೀಡ್ ಪೂರೈಕೆ, ಪ್ರಕೃತಿ ವಿಕೋಪದ ನಷ್ಟ ಮತ್ತು ಸಾಲ ಸೌಲಭ್ಯಗಳ ಕೊರತೆಯಂತಹ ಗಂಭೀರ ಸಮಸ್ಯೆಗಳನ್ನು ಒಕ್ಕೂಟವು ರಕ್ಷಿತ್ ಶಿವರಾಮ್ ಅವರ ಮುಂದಿಟ್ಟಿತು.
ರೈತರ ಅಹವಾಲುಗಳನ್ನು ಆಲಿಸಿದ ರಕ್ಷಿತ್ ಶಿವರಾಮ್ ಅವರು, ಒಕ್ಕೂಟದ ಪದಾಧಿಕಾರಿಗಳೊಂದಿಗೆ ವಿಶೇಷ ಮುತುವರ್ಜಿ ವಹಿಸಿ ಸುದೀರ್ಘವಾಗಿ ಚರ್ಚಿಸಿದರು. ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಕೋಳಿ ಸಾಕಾಣಿಕೆದಾರರ ಕೊಡುಗೆ ಮಹತ್ವದ್ದಾಗಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಮಸ್ಯೆಯ ಬಗ್ಗೆ ಸರ್ಕಾರಿ ಮಟ್ಟಕ್ಕೆ ಸ್ಪಷ್ಟವಾಗಿ ತಿಳಿಸಿ, ರೈತರಿಗೆ ನ್ಯಾಯಯುತವಾದ ಪರಿಹಾರ ಮತ್ತು ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ತಾನು ಸಂಪೂರ್ಣವಾಗಿ ಕೆಲಸ ಮಾಡುವುದಾಗಿ ರಕ್ಷಿತ್ ಶಿವರಾಮ್ ಭರವಸೆ ನೀಡಿದರು. ಸರ್ಕಾರದ ಮಟ್ಟದಲ್ಲಿ ಸಕಾರಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವ ಭರವಸೆ ನೀಡಿರುವುದು ರೈತರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.












