ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರುಗಿತು.

ಸೇಕ್ರೆಡ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರು ಹಾಗೂ ಶಿಕ್ಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿ, ಶಾಲಾ ಆಡಳಿತ, ಶಿಕ್ಷಕ ವರ್ಗ ಹಾಗೂ ಪೋಷಕರ ಮಧ್ಯೆ ಮಕ್ಕಳು ಸೇತುವೆಯಿದ್ದಂತೆ. ಶಾಲೆಯ ಸಕಾರಾತ್ಮಕ ವಿಚಾರವನ್ನು ಹೊರಗಡೆ ಹಾಗೂ ನಕಾರಾತ್ಮಕ ಅಂಶವನ್ನು ಶಾಲೆಗೆ ಸಂಬಂಧಪಟ್ಟವರಿಗೆ ತಿಳಿಸಿದಾಗ ಶಾಲೆಯ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಅವರು ಹೇಳಿದರು.
ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಹೇಮಲತಾ ಎಂ. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು. ಮಕ್ಕಳ ಮುಂದೆ ಹೆತ್ತವರು ತಮ್ಮ ನಡವಳಿಕೆಯಲ್ಲಿಯೇ ಉತ್ತಮ ಮಾದರಿಯಾಗಬೇಕು. ದುಶ್ಚಟಗಳಿಂದ ದೂರವಿದ್ದು, ನೈತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳಿಗೂ ಅವುಗಳ ಮಹತ್ವವನ್ನು ತಿಳಿಸಬೇಕು. ಪ್ರೀತಿ ಮತ್ತು ಶಿಸ್ತಿನ ಸಮನ್ವಯದೊಂದಿಗೆ ಮಕ್ಕಳನ್ನು ಬೆಳೆಸಿದಾಗ ಅವರಲ್ಲಿ ಆತ್ಮವಿಶ್ವಾಸ ಹಾಗೂ ಜವಾಬ್ದಾರಿಯುತ ಮನೋಭಾವ ಬೆಳೆಯುತ್ತದೆ ಎಂದು ಅವರು ಹೇಳಿದರು.
ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ನೆಲ್ಸನ್ ಲಸ್ರಾದೊ ಹಾಗೂ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಪಡ್ಪು ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಕಾರ್ಯಕಾರಿ ಸಮಿತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಉಪಾಧ್ಯಕ್ಷರಾಗಿ ಅಬ್ದುಲ್ ರೆಹಮಾನ್ ಪಡ್ಪು ಅವಿರೋಧವಾಗಿ ಆಯ್ಕೆಯಾದರು.
ಇದೇ ಸಂದರ್ಭದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಅವರ ಹೆತ್ತವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ಸ್ವಾಗತಿಸಿದರು. ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ಅವರು 2025–26ನೇ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಉಪನ್ಯಾಸಕಿ ಅಶ್ವಿನಿ ಹಿಂದಿನ ಸಭೆಯ ವರದಿ ವಾಚಿಸಿದರು. ಉಪನ್ಯಾಸಕಿ ಅನಿತಾ ಲೋಬೊ ವಂದಿಸಿದರು. ರೆನಿಟಾ ಕಾರ್ಡೊಜ ಹಾಗೂ ಶೋಭಾ ಕಾರ್ಯಕ್ರಮ ನಿರೂಪಿಸಿದರು.












