ಬೆಳ್ತಂಗಡಿ (ಆ-20): ತಾಲೂಕಿನ ನಾವೂರು ಗ್ರಾಮದ ಪಲ್ಕೆಯಿಂದ ಕುಮರಾಜೆಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಪರೀತ ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟು, ರಸ್ತೆ ಸಂಚಾರಕ್ಕೆ ತೀವ್ರ ತೊಂದರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಹಲವೆಡೆ ಗುಂಡಿಗಳು ನಿರ್ಮಾಣವಾಗಿದ್ದು, ಕೆಸರು ತುಂಬಿ ಪಾದಚಾರಿಗಳು ಹಾಗೂ ವಾಹನ ಸವಾರರು ಸಂಚರಿಸಲು ಕೂಡ ಕಷ್ಟವಾಗುತ್ತಿದೆ.

ಈ ರಸ್ತೆಯ ಅವ್ಯವಸ್ಥೆಯಿಂದಾಗಿ ಆ ಭಾಗದ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಓಡಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವುದಕ್ಕೂ ಸಮಸ್ಯೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸಮಸ್ಯೆಯನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಾವೂರು ಬ್ರಾಂಚ್ ಅಧ್ಯಕ್ಷರಾದ ಸ್ವಾದಿಕ್ ಕಿರ್ನಡ್ಕ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳ ಸಹಿ ಸಂಗ್ರಹಿಸಿ, ರಸ್ತೆಯನ್ನು ತುರ್ತಾಗಿ ದುರಸ್ತಿಪಡಿಸುವಂತೆ ಆಗ್ರಹಿಸಿ ನಾವೂರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಯಿತು.

ಮಳೆಗಾಲದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮತ್ತಷ್ಟು ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆಯ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸ್ಥಳೀಯರಾದ ಟೊಮಿ ಕುಮರಾಜೆ, SDPI ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಖಾದರ್ ನಾವೂರು, ಬ್ಲಾಕ್ ಕಾರ್ಯದರ್ಶಿ ಸಾದಿಕ್ ನಾವೂರು, ಬ್ರಾಂಚ್ ಕಾರ್ಯದರ್ಶಿ ಸಲೀಂ ಮುರ, ಸದಸ್ಯರಾದ ಅಬೂಸಾಲಿ ಕುಮರಾಜೆ, ಬಶೀರ್ ನಾವೂರ್, ನಿಜಾಮ್ ಉಪಸ್ಥಿತರಿದ್ದರು.











