ಪಿಲ್ಯ ಐತಿಹಾಸಿಕ ಬರಾಯಕೆರೆ ಬಳಿಯ ಕಪ್ಪು ಕಲ್ಲಿನ ಗಣಿಗಾರಿಕೆ ಪ್ರದೇಶಕ್ಕೆ: ಪೋಲಿಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಭೇಟಿ

ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯ ಭೂಮಾಲೀಕ , ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು , ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.. ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು , ಮೋರಿಗಳು ನಾಶಗೊಂಡಿದೆ. ಐತಿಹಾಸಿಕ ಬರಾಯಕೆರೆ ಸಂಪೂರ್ಣ ಕಲುಷಿತಗೊಂಡಿದೆ ಎಂದು ಇತ್ತೀಚೆಗೆ ನಾಗರಿಕರು ತಹಶೀಲ್ದಾರರಿಗೆ ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ಖುದ್ದಾಗಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ , ಹರೀಶ್ ಪೂಜಾರಿ , ಪ್ರವೀಣ್ ನಿನ್ನಿಕಲ್ಲು , ಜೋನ್ ಡಿಸೋಜ , ಸುಬ್ರಹ್ಮಣ್ಯ ಮಡಿವಾಳ , ವಿಶ್ವನಾಥ ಪಿಲ್ಯ , ಜೋಕಿಂ ಡಿಸೋಜ , ಕೂಸ ಅಳದಂಗಡಿ , ವಿಲ್ಮಾ ಡಿಸೋಜ , ರೀಟಾ ಡಿಸೋಜ , ಗೀತಾ , ವನಿತಾ ಹರೀಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.











