ಉಜಿರೆ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಆ.28 ರಂದು ಯುವ ಸಾಧಕಿ ಹಾಗೂ ಯುವ ಮಾರ್ಗದರ್ಶಕಿ ವಿಷ್ಣುಪ್ರಿಯಾ ಪೈ ಅವರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
“Beyond Limits: The Extraordinary Journey of a Young Achiever” ಎಂಬ ವಿಷಯದ ಕುರಿತು ಮಾತನಾಡಿದ ವಿಷ್ಣುಪ್ರಿಯಾ ಪೈ ಅವರು, ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಜೀವನದಲ್ಲಿ ಎದುರಾಗುವ ಒತ್ತಡ ಹಾಗೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವುದು, ಸಮಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಮತ್ತು ಗುರಿಯತ್ತ ಏಕಾಗ್ರತೆಯಿಂದ ಸಾಗುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿಗಳು ಒತ್ತಡವನ್ನು ಹೇಗೆ ನಿಭಾಯಿಸಬೇಕು ಹಾಗೂ ಭಾವನೆಗಳನ್ನು ಹೇಗೆ ನಿಯಂತ್ರಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದ ಅವರು, ಭಾವನೆಗಳನ್ನು ನಿಯಂತ್ರಿಸಲು ಹಾಗೂ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಲು ಕೆಲವು ಸರಳ ವ್ಯಾಯಾಮಗಳನ್ನು ಪ್ರಾಯೋಗಿಕವಾಗಿ ಕಲಿಸಿಕೊಟ್ಟರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕ ಶಿಕ್ಷಕಿ ಶ್ರೀಮತಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಾದ ಆತ್ಮೀಯ ಮತ್ತು ಸನಿಹಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಲಿಖಿತ್ ವಂದನಾರ್ಪಣೆ ಸಲ್ಲಿಸಿದರು.
ಯುವ ಸಾಧಕಿಯ ಅನುಭವ ಹಾಗೂ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಪ್ರೇರಣೆಯ ಜೊತೆಗೆ ಒತ್ತಡ ನಿರ್ವಹಣೆ, ಆತ್ಮವಿಶ್ವಾಸ ಮತ್ತು ಗುರಿಸಾಧನೆಯ ಕುರಿತು ಹೊಸ ಚಿಂತನೆ ಮೂಡಿಸಿತು.











