ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣಗುರುಗಳ ಸಮಾನತೆ, ಶಿಕ್ಷಣ, ಸ್ವಾಭಿಮಾನ ಹಾಗೂ ಮಾನವೀಯತೆಯ ತತ್ವಗಳು ಇಂದಿನ ಯುವಜನತೆಗೆ ಅತ್ಯಂತ ಪ್ರಸ್ತುತವಾಗಿದ್ದು, ಅವರ ವಿಚಾರಧಾರೆಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳು ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ ಆ.28 ರಂದು ಲಾಯಿಲದ ಸಂಗಮ ಸಭಾಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾರಾಯಣ ಗುರುಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ, ಇಡೀ ಮಾನವಕುಲಕ್ಕೆ ಸಮಾನತೆ ಮತ್ತು ಮಾನವೀಯತೆಯ ಸಂದೇಶ ನೀಡಿದ ಮಹಾನ್ ದಾರ್ಶನಿಕರಾಗಿದ್ದಾರೆ ಎಂದು ತಿಳಿಸಿದರು.
ಪ್ರಧಾನ ಭಾಷಣಕಾರ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳು ಕೇವಲ ಒಬ್ಬ ವ್ಯಕ್ತಿಯಾಗಿರಲಿಲ್ಲ, ಅವರು ಸಮಾಜವನ್ನು ಬದಲಾಯಿಸಿದ ಒಂದು ಮಹಾನ್ ಚೇತನ ಮತ್ತು ದಿವ್ಯ ಶಕ್ತಿಯಾಗಿದ್ದರು. ಜಾತಿ ಭೇದವಿಲ್ಲದೆ, ಮತ ದ್ವೇಷವಿಲ್ಲದೆ, ಎಲ್ಲರೂ ಸೋದರರಂತೆ ಬಾಳುವ ಮಾದರಿ ಸ್ಥಾನವಿದು” ಎಂದು ಸಾರಿದರು. ಉದ್ಯೋಗಕ್ಕೆ ಪ್ರೇರಣೆ, ಪ್ರತಿಯೊಬ್ಬರೂ ಸ್ವಾವಲಂಬಿ ಜೀವನ ನಡೆಸಲು ಮಾರ್ಗದರ್ಶನ ಮಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆಲೋಚನೆಗಳು ಮತ್ತು ತತ್ವಗಳು ಯಾವುದೇ ಒಂದು ಕಾಲಕ್ಕೆ ಅಥವಾ ಜಾತಿಗೆ ಸೀಮಿತವಾಗಿಲ್ಲ. ಅವರು ಇಡೀ ಮಾನವಕುಲವನ್ನು ಉದ್ಧರಿಸಲು ಬಂದ ಅದ್ಭುತ ಶಕ್ತಿಯಾಗಿದ್ದಾರೆ ಎಂದು ಹೇಳಿದರು.
ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ತಹಶೀಲ್ದಾರ್ ಎಸ್.ಎನ್. ನರಗುಂದ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ ಹಾಗೂ ಬೆಳ್ತಂಗಡಿ ನಾರಾಯಣ ಗುರು ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಂದೆ ಮಾತರಂ ಹಾಗೂ ನಾಡ ಗೀತೆ ಹಾಡಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುರ್ಷ್ಪಾಣೆ ಮಾಡಲಾಯಿತು. ಮೊದಲ ಬಾರಿಗೆ ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯ ಕಾರ್ಯಕ್ರಮದಲ್ಲಿ ಅಧಿಕ ಮಂದಿ ಪಾಲ್ಗೊಂಡಿದ್ದರು ಆದರೆ ಅಧಿಕಾರಿಗಳ ಸಂಖ್ಯೆ ಕ್ಷೀಣವಾಗಿತ್ತು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿ, ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕ ಜಯಾನಂದ ಅಂಕಾಜೆ ವಂದಿಸಿ, ಕಂದಾಯ ಇಲಾಖೆಯ ಹೇಮಾ ಮತ್ತು ಪಶುಸಂಗೋಪಣೆಯ ಇಲಾಖೆಯ ರಾಜಶ್ರೀ ನಿರೂಪಿಸಿದರು. ಕಂದಾಯ ಇಲಾಖೆಯ ಪರಮೇಶ್ ಟಿ.ಹಾಗೂ ಪ್ರತಿಭಾ ಸಹಕರಿಸಿದರು.











