ಕರಿಮಣೇಲು: ಬ್ರೈಟ್ ಹೊರೈಝನ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ ಸ್ವೀಕಾರ ಸಮಾರಂಭವು ಆ.29ರಂದು ನಡೆಯಿತು.
ಮುಖ್ಯ ಅತಿಥಿ, ಬೆಳ್ತಂಗಡಿ ಕ್ಷೇತ್ರದ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಭಾಷೆಯ ಬಗ್ಗೆಯೂ ಕೀಳರಿಮೆ ಹೊಂದದೆ, ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯನ್ನು ಗೌರವಿಸಬೇಕು ಎಂದರು.
ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದೆ. ವಿದ್ಯಾಭ್ಯಾಸದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲೂ ಭಾಗವಹಿಸಿ, ಜೀವನದಲ್ಲಿ ಎದುರಾಗುವ ಸೋಲು-ಸವಾಲುಗಳನ್ನು ಧೈರ್ಯ ಹಾಗೂ ಸ್ಥೈರ್ಯದಿಂದ ಎದುರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಂತರ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಚುನಾವಣೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಶರತ್ ಗೋರೆ, ಕಾರ್ಯದರ್ಶಿ ಶಾಂಭವಿ, ಪ್ರಾಂಶುಪಾಲ ಡಾ. ಶಶಿಧರ್, ಶೈಕ್ಷಣಿಕ ಮುಖ್ಯಸ್ಥೆ ಜೆಸಿಂಥ ಡಿ. ಕುನ್ಹ ಹಾಗೂ ಕ್ಯಾಂಪಸ್ ಹೆಡ್ ಪ್ರಖ್ಯಾತ್ ಭಂಡಾರಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.











