ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಭಾರತದ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ಮಾತನಾಡಿ, ಮೇಜರ್ ಧ್ಯಾನ್ ಚಂದ್ ಅವರು ತಮ್ಮ ಅದ್ಭುತ ಕ್ರೀಡಾ ಪ್ರತಿಭೆಯಿಂದ ಭಾರತಕ್ಕೆ ಹೆಮ್ಮೆ ತಂದವರು. ಅವರ ಸಾಧನೆ ಮತ್ತು ಪರಿಶ್ರಮವು ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಿಲಿ ಎಂದರು.
ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿದ್ದ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ಮಾತನಾಡಿ, ಕ್ರೀಡೆ ನಮ್ಮ ಜೀವನದ ಅವಿಭಾಜ್ಯ ಅಂಗ. ಕ್ರೀಡೆ ದೇಹವನ್ನು ಆರೋಗ್ಯವಾಗಿಡುವುದರ ಜೊತೆಗೆ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ತಂಡದ ಮನೋಭಾವ ಮತ್ತು ಸೋಲನ್ನು ಸ್ವೀಕರಿಸುವ ಗುಣವನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವಿಕೆ, ಪರಿಶ್ರಮ ಮತ್ತು ಕ್ರೀಡಾ ಸ್ಫೂರ್ತಿ ಹೆಚ್ಚು ಮುಖ್ಯ ಎಂದರು.
ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶದಿಂದ ಎನ್ ಎಸ್ ಎಸ್ (NSS) ವತಿಯಿಂದ “ಏಕ್ ಘಂಟಾ ಖೇಲ್ ಕೇ ಮೈದಾನ್ ಮೇ ” (ಒಂದು ಗಂಟೆ ಆಟದ ಮೈದಾನದಲ್ಲಿ) ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಒಂದು ಗಂಟೆಯ ಕಾಲ ಆಟದ ಮೈದಾನದಲ್ಲಿ ವಿವಿಧ ಕ್ರೀಡೆಗಳು ಮತ್ತು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕರಾದ ಚಂದ್ರನಾಥ್ ಜೈನ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಜಶ್ವಾಂತ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಉಪನ್ಯಾಸಕ ಸಂಪತ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











