ಮುಂಡಾಜೆ: ಶತಾಬ್ದಿ ವಿದ್ಯಾಲಯ ಸಮಿತಿಯ ಅಧೀನದಲ್ಲಿರುವ ಮುಂಡಾಜೆ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 36 ವರ್ಷಗಳಿಂದ ಶಿಕ್ಷಕಿಯಾಗಿ ಹಾಗೂ ಮುಖ್ಯ ಶಿಕ್ಷಕಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಜಯಂತಿ ಟಿ. ಅವರು ಆ.31ರಂದು ವಯೋನಿವೃತ್ತಿ ಹೊಂದಿದರು. ಈ ಹಿನ್ನೆಲೆಯಲ್ಲಿ ಶಾಲೆಯ ವತಿಯಿಂದ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಜಯಂತಿ ಟಿ. ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುವುದರ ಜತೆಗೆ ಮುಖ್ಯ ಶಿಕ್ಷಕಿಯಾಗಿ ಶಾಲೆಯ ಆಡಳಿತಾತ್ಮಕ ಜವಾಬ್ದಾರಿಯನ್ನೂ ಸಮರ್ಥವಾಗಿ ನಿರ್ವಹಿಸಿ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ಸನ್ಮಾನ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ, ಉಪಾಧ್ಯಕ್ಷೆ ರೂಪಲೇಖ, ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ, ಸದಸ್ಯ ವೆಂಕಟೇಶ್ವರ ಭಟ್ ಕಜೆ, ನಾರಾಯಣಗೌಡ , ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಎಂ.ಟಿ. ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.











