ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 1ರಂದು ‘Career in Armed Forces’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ವಾಯುಪಡೆಯ 104 ಹೆಲಿಕಾಪ್ಟರ್ ಸ್ಕ್ವಾಡ್ರನ್, ಶ್ರೀ ಗಂಗಾನಗರ, ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಪೊರಲ್ ಜಯಪ್ರಕಾಶ್ ಕೆ. ಹಾಗೂ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಸಹಾಯಕ ಶಿಕ್ಷಕ ದೀಕ್ಷಿತ್ ಎಂ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.
ಭಾರತೀಯ ಸಶಸ್ತ್ರ ಪಡೆಗಳಲ್ಲಿ ಲಭ್ಯವಿರುವ ವೃತ್ತಿ ಅವಕಾಶಗಳು, ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ, ಅರ್ಹತೆ, ಆಯ್ಕೆ ವಿಧಾನ, ಶಾಶ್ವತ ಕೇಡರ್ಗೆ ಆಯ್ಕೆಯಾಗುವ ಅವಕಾಶಗಳು, ವೇತನ, ಸೌಲಭ್ಯಗಳು ಹಾಗೂ ಸೇವೆಯಿಂದ ದೊರೆಯುವ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.
ವಾಣಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಕಾರ್ಪೊರಲ್ ಜಯಪ್ರಕಾಶ್ ಕೆ. ಅವರು ತಮ್ಮ ಸೈನಿಕ ಸೇವೆಯ ಅನುಭವಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ದೇಶಸೇವೆಯ ಮನೋಭಾವದೊಂದಿಗೆ ಸಶಸ್ತ್ರ ಪಡೆಗಳಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ವಾಣಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಪೊರಲ್ ಜಯಪ್ರಕಾಶ್ ಕೆ. ಅವರನ್ನು ಕಾಲೇಜಿನ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಅವರ ಸೇವೆ ಹಾಗೂ ಸಾಧನೆಯನ್ನು ಅಭಿನಂದಿಸಿ, ವಿದ್ಯಾರ್ಥಿಗಳಿಗೆ ಅವರು ಪ್ರೇರಣೆಯ ಚಿಲುಮೆಯಾಗಿದ್ದಾರೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಖ್ಯಾಶಾಸ್ತ್ರ ಉಪನ್ಯಾಸಕ ಸುರೇಂದ್ರ ಸ್ವಾಗತಿಸಿದರು. ಗಣಕ ವಿಜ್ಞಾನ ಉಪನ್ಯಾಸಕ ಸುಧೀರ್ ಕೆ.ಎನ್. ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ. ವಂದಿಸಿದರು.











