
ಬೆಳ್ತಂಗಡಿ: ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿ 3639/2007 ಹಾಗೂ ಇತರೆ ಪ್ರಕರಣಗಳನ್ನು ವಾಪಸ್ ಪಡೆಯುವ ಬಗ್ಗೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ಸದಸ್ಯ , ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47 ಕುಟುಂಬಗಳು ಶತಮಾನಗಳಿಂದ ವಾಸಿಸುತ್ತಿದ್ದಾರೆ. ಈ ಕುಟುಂಬಗಳ ಪೈಕಿ 37 ಕುಟುಂಬಗಳಿಗೆ ಭೂನ್ಯಾಯ ಮಂಡಳಿಯಿಂದ ಭೂಸುಧಾರಣಾ ಕಾಯ್ದೆಯಂತೆ ಜಮೀನು ಮಂಜೂರುಗೊಂಡಿತ್ತು. ಈ ಜಮೀನನ್ನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ 3639/2007 ಸಲ್ಲಿಸಲಾಗಿದೆ. ಇದಲ್ಲದೆ ಇದೇ ಜಮೀನಿನ ಮೇಲೆ ಇತರೆ ಪ್ರಕರಣಗಳನ್ನು ದಾಖಲಿಸಲಾಗಿದ್ದು , ಇದರಿಂದಾಗಿ ಬಾಂಜಾರು ಮಲೆಕುಡಿಯ ಕಾಲೋನಿಯ ಕುಟುಂಬಗಳು ತೀವ್ರ ತೊಂದರೆ ಉಂಟಾಗಿದೆ. ಪ್ರತಿ ಕುಟುಂಬಗಳು 4 ರಿಂದ 6 ಎಕರೆ ತನಕವೂ ಜಮೀನು ಹೊಂದಿದ್ದು , ಮನೆ ನಿರ್ಮಾಣ ಮಾಡಿ , ಕೃಷಿ ಕೃತಾವಳಿಗಳನ್ನು ಬರುತ್ತಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಹಾಗೂ ಇತರೆ ಪ್ರಕರಣಗಳಲ್ಲಿ ತಮ್ಮ ಜಮೀನನ್ನು ಕಳೆದುಕೊಳ್ಳುವ ಭೀತಿ ಉಂಟಾಗಿದ್ದು , ರಾಜ್ಯ ಸರ್ಕಾರ ತಕ್ಷಣ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ಹಾಕಿರುವ ರಿಟ್ ಅರ್ಜಿ ಹಾಗೂ ಇತರೆ ಪ್ರಕರಣಗಳನ್ನು ವಾಪಸ್ ಪಡೆಯುವ ಐತಿಹಾಸಿಕ ತೀರ್ಮಾನವನ್ನು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ಅಗತ್ಯವಿದೆ ಎಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತಾಲೂಕು ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.











