ಬೆಳ್ತಂಗಡಿ:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಕಾರ್ಯವ್ಯಾಪ್ತಿಯನ್ನಾಗಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದೆ.
ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 5ರಂದು ನಡೆಯಲಿದ್ದು, ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಹಾಗೂ ‘ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಭಗೀರಥ ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು ಹಾಗೂ ಈ ಹಿಂದೆ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಜಿ. ಜಗದೀಶ್, ಐಎಎಸ್ ಅವರಿಗೆ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದ ಹಾಸ್ಯ ಕಲಾವಿದ ಸುಂದರ ಬಂಗಾಡಿ, ಸ್ನೇಹದೀಪ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಂಸ್ಥಾಪಕಿ ತಬಸ್ಸುಮ್, ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕು. ದಿಶಾ ಪೂಜಾರಿ ಹಾಗೂ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಕು. ಧನಲಕ್ಷ್ಮೀ ಪೂಜಾರಿ ಅವರಿಗೆ ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಸಂಘದ ಅಧ್ಯಕ್ಷ ಭಗೀರಥ ಜಿ., ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











