ಪುಂಜಾಲಕಟ್ಟೆ: ಮೂಡುಬಿದ್ರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಎಂಜಿನಿಯರಿಂಗ್ (MITE) ಕಾಲೇಜಿನ ವಿದ್ಯಾರ್ಥಿಗಳ ನೇತೃತ್ವದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಪ್ರಾಜೆಕ್ಟ್ ವಿನ್ಯಾಸ ಕಾರ್ಯಾಗಾರ ಸೆ. 2 ಮತ್ತು 3ರಂದು ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರದಲ್ಲಿ ಶಾಲೆಯ 8ನೇ ಮತ್ತು 9ನೇ ತರಗತಿಯ ಸುಮಾರು 210 ವಿದ್ಯಾರ್ಥಿಗಳು ಭಾಗವಹಿಸಿ, ಪ್ರಾಜೆಕ್ಟ್ ವಿನ್ಯಾಸ, ಆವಿಷ್ಕಾರ, ಸಮಸ್ಯೆ ಪರಿಹಾರ ಹಾಗೂ ತಾಂತ್ರಿಕ ಕೌಶಲ್ಯಗಳ ಕುರಿತು ಪ್ರಾಯೋಗಿಕ ಅನುಭವವನ್ನು ಪಡೆದುಕೊಂಡರು. ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ತಮ್ಮ ಕಲ್ಪನೆಗಳನ್ನು ಪ್ರಾಜೆಕ್ಟ್ಗಳಾಗಿ ರೂಪಿಸುವ ವಿಧಾನವನ್ನು ಕಲಿತರು.
ಶಾಲೆಯ ಉಪಪ್ರಾಂಶುಪಾಲರಾದ ಗಣೇಶ ಬಿ. ಹಾಗೂ ಮುಖ್ಯೋಪಾಧ್ಯಾಯರಾದ ಷಣ್ಮುಖ ಪಿ.ಎಲ್. ಅವರು ಕಾರ್ಯಾಗಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಾಗಾರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಮೈಟ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ರಂಜಿತ್ ಎಚ್.ಡಿ. ಹಾಗೂ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಾದ ಸೂರಜ್ ಶೆಟ್ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲೆಯ ಶಿಕ್ಷಕರಾದ ಧರಣೇದ್ರ ಜೈನ ಹಾಗೂ ರುದ್ರಸ್ವಾಮಿ ಸೇರಿದಂತೆ ಇತರ ಶಿಕ್ಷಕರು ಕಾರ್ಯಾಗಾರಕ್ಕೆ ಸಹಕರಿಸಿದರು.
ಮೈಟ್ ಕಾಲೇಜಿನ ಸುಮಾರು 50 ವಿದ್ಯಾರ್ಥಿಗಳು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಮಾರ್ಗದರ್ಶಕರಾಗಿ ಭಾಗವಹಿಸಿದರು. ಎರಡು ದಿನಗಳ ಕಾರ್ಯಾಗಾರವು ಶಾಲಾ ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ತಾಂತ್ರಿಕ ಅರಿವು, ತಂಡದ ಕಾರ್ಯವೈಖರಿ ಹಾಗೂ ಸಮಸ್ಯೆ ಪರಿಹಾರ ಕೌಶಲ್ಯಗಳನ್ನು ಬೆಳೆಸುವಲ್ಲಿ ಸಹಕಾರಿಯಾಯಿತು.
ಮೈಟ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಜ್ಞಾನ ಮತ್ತು ಕಲಿಕೆಯನ್ನು ಶಾಲಾ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡು, ತಂತ್ರಜ್ಞಾನ ಹಾಗೂ ನವೀನತೆಯ ಕುರಿತು ಅವರಲ್ಲಿ ಆಸಕ್ತಿ ಮೂಡಿಸುವಲ್ಲಿ ಯಶಸ್ವಿಯಾದರು.
ಕಾರ್ಯಾಗಾರದ ಯಶಸ್ವಿ ಆಯೋಜನೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.












