ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುಸ್ಮೃತಿ -2026” ಕಾರ್ಯಕ್ರಮವನ್ನು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಉದ್ಘಾಟಿಸಿದರು. ಬಳಿಕ ಮಾತನಾಡಿದ ಇವರು, ಶಿಕ್ಷಕರು ಕೇವಲ ಪಾಠ ಬೋಧಕರಲ್ಲ, ಬದಲಾಗಿ ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು ತೋರಿಸುವ ಮಾರ್ಗದರ್ಶಕರು ಮತ್ತು ಮೌಲ್ಯಗಳನ್ನು ಬಿತ್ತುವ ಶಿಲ್ಪಿಗಳು . ಶಿಕ್ಷಣದ ನಿಜವಾದ ಉದ್ದೇಶ ವ್ಯಕ್ತಿತ್ವ ನಿರ್ಮಾಣವಾಗಿದ್ದು, ಶಿಕ್ಷಕ-ವಿದ್ಯಾರ್ಥಿಗಳ ನಡುವಿನ ವಿಶ್ವಾಸ, ಗೌರವ ಮತ್ತು ಆತ್ಮೀಯತೆಯ ಸಂಬಂಧವು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಧನೆಯ ಹಾದಿಯಲ್ಲಿ ಶಿಕ್ಷಕರ ಕೊಡುಗೆಯನ್ನು ಮರೆಯಬಾರದು ಎಂದರು.
ಬಳಿಕ ಕಲಾ ಸಂಘದ ಅಧ್ಯಕ್ಷ ನೆವಿಲ್ ನವೀನ್ ಮೊರಾಸ್ ಶಿಕ್ಷಕರ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರು ಪೋಷಕರಷ್ಟೇ ಮಹತ್ವದ ಸ್ಥಾನವನ್ನು ಹೊಂದಿದ್ದಾರೆ. ಶಿಕ್ಷಕರು ಜ್ಞಾನ ನೀಡುವುದರ ಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ರೀತಿಯ ಗೌರವ ಸಮರ್ಪಣೆಗಳ ಮೂಲಕ ತಮ್ಮ ಪ್ರೀತಿ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಜೊತೆಯಾಗಿ ಗಾಯನ, ನೃತ್ಯ, ಮನರಂಜನಾ ಚಟುವಟಿಕೆಗಳು ಹಾಗೂ ವಿವಿಧ ಕಲಾ ಪ್ರದರ್ಶನಗಳು ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಿ ಸಂಭ್ರಮ ಹಂಚಿಕೊಂಡಿದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳ ವತಿಯಿಂದ ಭೋಜನ ವ್ಯವಸ್ಥೆ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪರಸ್ಪರ ಆತ್ಮೀಯವಾಗಿ ಬೆರೆತು ಶಿಕ್ಷಕರ ದಿನಾಚರಣೆಯನ್ನು ಸ್ಮರಣೀಯವಾಗಿಸಿದರು. ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಕರ ಪಾತ್ರವನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿತು.
ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ಪ್ರೊ. ನಂದಾ ಕುಮಾರಿ, ಆಡಳಿತ ಕುಲಸಚಿವ ಪ್ರೊ. ಶ್ರೀಧರ ಎನ್. ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೇಯಸ್ ಬಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚಿನ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಕಾರ್ಯಕ್ರಮವನ್ನು ವಿಜ್ಞಾನ ಸಂಘದ ಅಧ್ಯಕ್ಷ ರಂಜನ್ಕಾಲೇಜಿನ ಶಿಕ್ಷಕ ವೃಂದವನ್ನು ಸ್ವಾಗತಿಸಿದರು. ಪ್ರಥಮ ಬಿಬಿಎ ವಿದ್ಯಾರ್ಥಿನಿ ವಸುಧಾ ಹಾಗೂ ತೃತೀಯ ಬಿಎ ವಿದ್ಯಾರ್ಥಿನಿ ಸನುಷಾ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯ ಸಂಘದ ಅಧ್ಯಕ್ಷ ಭವಿಷಿತ್ ಅವರು ವಂದನಾರ್ಪಣೆ ಸಲ್ಲಿಸಿದರು.












