ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ “ಪ್ರಥಮ ಚಿಕಿತ್ಸೆಯ ಮೂಲಭೂತ ಅಂಶಗಳು” ವಿಷಯದ ಕುರಿತು ಸಂವಾದ ಕಾರ್ಯಕ್ರಮವು ಸೆ. 10ರಂದು ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.
ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಉಪನ್ಯಾಸಕ ಅವನೀಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಮಹತ್ವ, ಕೈಗೊಳ್ಳಬೇಕಾದ ಪ್ರಾಥಮಿಕ ಕ್ರಮಗಳು ಹಾಗೂ ಅಪಘಾತ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ವಿದ್ಯಾರ್ಥಿಗಳು ವಹಿಸಬೇಕಾದ ಜವಾಬ್ದಾರಿಗಳ ಕುರಿತು ಪ್ರಾಯೋಗಿಕ ಹಾಗೂ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಸಿಂಚನಾ ಎಂ.ಸಿ. ನೆರವೇರಿಸಿದರು.
ಕುಮಾರಿ ರುಶಿಕಾ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ ಅನುರಾಧಾ ಕೆ. ರಾವ್, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕಿ, ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.
ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳಾದ ಅರೇಲ್ ರಿಷಾ ರೋಡ್ರಿಗಸ್ ಹಾಗೂ ಸಂಭ್ರಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಜೂನಿಯರ್ ರೆಡ್ ಕ್ರಾಸ್ ಘಟಕದ ಯೂನಿಟ್ ಲೀಡರ್ ಮನೀಶ್ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












